ಅಪ್ಪುಗೆ ಸಿಕ್ಕ ಕರ್ನಾಟಕ ರತ್ನ ಅಂಬಿಗೆ ಯಾಕಿಲ್ಲ? ಅಭಿಮಾನಿಗಳ ಪ್ರಶ್ನೆಗೆ ಸುಮಲತ ಅವರಿಂದ ಬಂತು ಉತ್ತರ
ನಟ ಪುನೀತ್ ರಾಜ್ಕುಮಾರ್ ಅವರ ಅಗಲಿಕೆ ಕನ್ನಡ ಸಿನಿಮಾ ರಂಗ ಹಾಗೂ ಜನರಿಗೆ ತೀರದ ನಷ್ಟವಾಗಿದೆ. ಪುನೀತ್ ಅವರ ನಿಧನದ ನಂತರ ಜನರು ಅವರ ಮೇಲಿನ ಪ್ರೀತಿ ಹಾಗೂ ಅಭಿಮಾನದಿಂದ ಅನೇಕ ರಸ್ತೆಗಳಿಗೆ ಅವರ ಹೆಸರನ್ನು ಇಟ್ಟಿದ್ದಾರೆ. ಸರ್ಕಾರ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಅಲ್ಲದೇ ಮುಖ್ಯಮಂತ್ರಿ ಅವರು ಅಪ್ಪು ಅವರ ಹೆಸರನ್ನು ಪದ್ಮಶ್ರೀ ಪ್ರಶಸ್ತಿ ಗಾಗಿ ಶಿಫಾರಸ್ಸು ಮಾಡುವುದಾಗಿ ಹೇಳಿದ್ದಾರೆ. ಇದೆಲ್ಲಾ ಕೂಡಾ ಬಹಳಷ್ಟು ಜನರಿಗೆ ಖುಷಿಯನ್ನು ನೀಡಿದೆ. ಆದರೆ ಇದೇ ಹೇಳೆ ಕೆಲವು ಅಸಮಾಧಾನಕ್ಕೆ ಕಾರಣವಾಗಿದೆ.
ಸೋಶಿಯಲ್ ಮೀಡಿಯಾಗಳಲ್ಲಿ ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ಅವರ ಅಭಿಮಾನಿಗಳು ತಾವು ಸಹಾ ರಸ್ತೆಗಳಿಗೆ ಅಂಬರೀಶ್ ಅವರ ಹೆಸರನ್ನು ಇಡುವುದಾಗಿ ಹಾಗೂ ಇನ್ನೂ ಕೆಲವು ಬೇಡಿಕೆಗಳ ಈಡೇರಿಕೆಗಾಗಿ ಹೋ ರಾ ಡ ನಡೆಸುವುದಾಗಿ ಹೇಳುತ್ತಿರುವುದನ್ನು ಗಮನಿಸಿರುವ ನಟಿ, ಸಂಸದೆ ಸುಮಲತ ಅಂಬರೀಶ್ ಅವರು, ಎಲ್ಲಾ ಅಂಬರೀಶ್ ಅಭಿಮಾನಿಗಳಿಗೆ ಸೋಶಿಯಲ್ ಮೀಡಿಯಾ ಮೂಲಕ ಒಂದು ಮಹತ್ವದ ಸಂದೇಶವನ್ನು ನೀಡಿ, ಎಲ್ಲರಲ್ಲೂ ಅರ್ಥ ಪೂರ್ಣ ಮನವಿಯನ್ನು ಮಾಡಿದ್ದಾರೆ.
ನನ್ನ ಮನವಿ ಎಂದು ಬರೆಯುತ್ತಾ ಪೋಸ್ಟ್ ಹಾಕಿರುವ ಸುಮಲತ ಅವರು, ನಮ್ಮ ಪ್ರೀತಿಯ ಡಾ|| ಅಂಬರೀಶ್ ಅವರನ್ನು ಆರಾಧ್ಯ ದೈವದಂತೆ ಪ್ರೀತಿಸಿ, ಅವರ ನೆನಪನ್ನು ಚಿರಸ್ಥಾಯಿಯಾಗಿ ಬೆಳಗಿಸುತ್ತಿರುವ ನೆಚ್ಚಿನ ಅಭಿಮಾನಿ ಸಂಘಗಳು ಹಾಗೂ ಇನ್ನಿತರ ಸಂಘಟನೆಗಳು ಇಂದು ಅಂಬರೀಶ್ ಅವರ ಸ್ಮಾರಕ ಅಭಿವೃದ್ಧಿಗೊಳಸುವುದು, ಅವರ ಹೆಸರಿನಲ್ಲಿ ರಸ್ತೆಗಳನ್ನು ನಾಮಕರಣ ಮಾಡುವುದು ಮತ್ತು ಇನ್ನಿತರ ಬೇಡಿಕೆಗಳನ್ನು ಒತ್ತಾಯಿಸಿ ಹೋರಾಟ ಮಾಡುವುದಾಗಿ ಹೇಳಿರುವುದು ಸಾಮಾಜಿಕ ಜಾಲತಾಣಗಳ ಮೂಲಕ ನನ್ನ ಗಮನಕ್ಕೆ ಬಂದಿದೆ.
ನಮ್ಮ ಕುಟುಂಬದೊಂದ್ಧಗೆ ಅತಿ ಹೆಚ್ಚು ಒಡನಾಟ ಹೊಂದಿದ್ದ ಹಾಗೂ ನಮ್ಮ ಮನೆ ಮಗನಂತಿದ್ದ ಪುನೀತ್ ರಾಜಕುಮಾರ್ ಅವರನ್ನು ಕಳೆದುಕೊಂಡಿರುವ ಆಘಾತಕಾರಿ ಘಟನೆಯಿಂದ ನನಗಾಗಿರುವ ನೋವನ್ನು ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ. ಇದರೊಂದಿಗೆ ಚಿತ್ರರಂಗ, ಅಭಿಮಾನಿಗಳು, ಹಾಗೂ ಕರ್ನಾಟಕ ರಾಜ್ಯದ ಜನತೆಗೆ ತುಂಬಲಾರದಂತ ನಷ್ಟ ಉಂಟಾಗಿದ್ದು, ಈ ಸಮಯದಲ್ಲಿ ತಾವುಗಳು ಹೋರಾಟ ಮಾಡುವ ನಿರ್ಧಾರ ಮಾಡಿರುವುದು ಎಲ್ಲರ ಹೃದಯದ ಮೇಲೆ ಆಗಿರುವ ಗಾಯದ ಮೇಲೆ ಬರೆ ಎಳೆದಂತೆ ಆಗುತ್ತದೆ.
ಆದುದರಿಂದ, ಈ ಸಮಯದಲ್ಲಿ ಈ ವಿಷಯ ಪ್ರಸ್ತಾಪಿಸುವುದು ಸಮಂಜಸವಲ್ಲ. ನಿಮ್ಮ ಭಾವನೆಗಳನ್ನು ನಾನು ಗೌರವಿಸುತ್ತೇನೆ, ಆದರೆ ಪ್ರಸ್ತುತ ಸಂದರ್ಭದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸುವುದರಿಂದ ಅಂಬರೀಷ್ ಅವರ ಘನತೆ ಹಾಗೂ ಗೌರವಕ್ಕೆ ಧಕ್ಕೆಯಾಗುತ್ತದೆ. ಯಾವುದೇ ಪ್ರಶಸ್ತಿಯಾದರು ಕೇಳಿ ಪಡೆಯುವುದು ಸರಿಯಲ್ಲ. ಎಲ್ಲಾ ಪ್ರಶಸ್ತಿಗಳನ್ನು ಮೀರಿದಂತ ಪ್ರೀತಿ ಮತ್ತು ಅಭಿಮಾನವನ್ನು ನೀವುಗಳು ನಮ್ಮ ಕುಟುಂಬಕ್ಕೆ ನೀಡಿದ್ದೀರಿ. ಅಂಬರೀಷ್ ಅವರು ತಮ್ಮ ಜೀವನದಲ್ಲಿ ಯಾವ ಪ್ರಶಸ್ತಿ, ಹುದ್ದೆ ಅಥವಾ ಸನ್ಮಾನವನ್ನು ಬಯಸಿದವರಲ್ಲ.
ಹೀಗಾಗಿ ಅಂಬರೀಷ್ ಅವರ ಅಭಿಮಾನಿಗಳಾಗಿ ತಾವುಗಳು ಸಹ ಅವರ ಹಾದಿಯಲ್ಲಿ ನಡೆಯಬೇಕು ಎನ್ನುವುದು ನನ್ನ ಆಶಯ. ಆದುದರಿಂದ, ಈ ಸಮಯದಲ್ಲಿ ಪ್ರಶಸ್ತಿ ಕೋರಿ ಹೋರಾಟ ಅಥವಾ ಪ್ರತಿಭಟನೆ ನಡೆಸುವುದು ಅಂಬರೀಷ್ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ವಿಷಯವಾಗಿದೆ. ಆದುದರಿಂದ, ತಮ್ಮೆಲ್ಲರ ಅಭಿಮಾನ ಮತ್ತು ಪ್ರೀತಿ-ವಾತ್ಸಲ್ಯಗಳನ್ನು ಗೌರವಿಸುತ್ತ, ಹಾಗೂ ನಿಮ್ಮೆಲ್ಲರ ಆಸೆಯನ್ನು ಮುಂದಿನ ದಿನಗಳಲ್ಲಿ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುವ ಮೂಲಕ ಈಡೇರಿಸುತ್ತದೆ ಎಂದು ಮಾನ್ಯ ಮುಖ್ಯಮಂತ್ರಿಗಳ ಮೇಲೆ ಭರವಸೆಯನ್ನು ಇಡುತ್ತಾ,
ತಾವು ತೆಗೆದುಕೊಂಡಿರುವ ಈ ಹೋರಾಟದ ನಿರ್ಧಾರವನ್ನು ಹಿಂಪಡೆದು ನವೆಂಬರ್ 24ನೇ ತಾರೀಕಿನಂದು ಅಂಬರೀಷ್ ಅವರ ಮೂರನೇ ವರ್ಷದ ಪುಣ್ಯಸ್ಮರಣೆಯನ್ನು ಶಾಂತಿಯುತವಾಗಿ ನೆರವೇರಿಸುವ ಮೂಲಕ ಅವರ ಆತ್ಮಕ್ಕೆ ಶಾಂತಿ ಕೋರೋಣ ಎಂದು ತಮ್ಮಲ್ಲಿ ಕಳಕಳಿಯಿಂದ ಪ್ರಾರ್ಥಿಸುತ್ತೇನೆ. ವಂದನೆಗಳೊಂದಿಗೆ ತಮ್ಮ ವಿಶ್ವಾಸಿ ಸುಮಲತಾ ಅಂಬರೀಷ್ ಎಂದು ಬರೆದುಕೊಂಡಿದ್ದಾರೆ.